ಸಾರ್ವಜನಿಕರ ದೂರು ಬೆನ್ನಲ್ಲೇ ಆಪರೇಷನ್: ಶಿವಮೊಗ್ಗದ 7 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತರ ಮಿಂಚಿನ ದಾಳಿ
ಶಿವಮೊಗ್ಗ: ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ದೂರುಗಳ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಗುರುವಾರ ಏಕಕಾಲಕ್ಕೆ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಒಟ್ಟು 7 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಅವರ ನೇತೃತ್ವದಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ.
ಲೋಕಾಯುಕ್ತ ಅಧಿಕಾರಿಗಳ ತಂಡವು ಬೆಳಗ್ಗೆ 11 ಗಂಟೆಗೆ ಕಚೇರಿಗಳಿಗೆ ಆಗಮಿಸಿದ್ದು, ಸಂಜೆಯವರೆಗೂ ದಾಖಲಾತಿಗಳನ್ನು ತೀವ್ರವಾಗಿ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಹಣಕಾಸಿನ ವಹಿವಾಟುಗಳು ಮತ್ತು ಇತರೆ ಕಡತಗಳ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಶಿವಮೊಗ್ಗ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಯು ಜೂನ್ 9 ರಂದು ಎಪಿಎಂಸಿ ಯಾರ್ಡ್ನ ಮುಂಭಾಗಕ್ಕೆ ಸ್ಥಳಾಂತರಗೊಂಡ ನಂತರ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವುದು ಇದೇ ಮೊದಲ ಬಾರಿ. ಈ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸಾರ್ವಜನಿಕ ಸೇವೆಗಳನ್ನು ಒದಗಿಸುವ ಪ್ರಮುಖ ಕಚೇರಿಗಳಾಗಿದ್ದು, ಇವುಗಳ ಮೇಲೆ ನಡೆದ ದಾಳಿಯು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದರಿಂದ, ಈ ಪರಿಶೀಲನೆಯಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

No comments:
Post a Comment